


ಬೆಂಗಳೂರು:** ಗಣೇಶ ಚತುರ್ಥಿ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಬಿಎ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಆಯೋಜಕರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಇದಕ್ಕಾಗಿ ವಾರ್ಡ್ವಾರು ನೋಡಲ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅರ್ಜಿ ಸಲ್ಲಿಸಿದ ಒಂದೇ ದಿನದಲ್ಲಿ ಪರಿಶೀಲನೆ ನಡೆಸಿ ಅನುಮತಿ ನೀಡುವ ವ್ಯವಸ್ಥೆ ಮಾಡಲಾಗಿದೆ. ಸಿಂಗಲ್ ವಿಂಡೋ ವ್ಯವಸ್ಥೆಯ ಮೂಲಕ ಅರ್ಜಿ ವಿಲೇವಾರಿಗೆ ಅವಕಾಶ ಕಲ್ಪಿಸಲಾಗಿದೆ.
ಮನೆಯಲ್ಲೇ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವವರಿಗೆ ಉಳಿಯುವ ಮಣ್ಣನ್ನು ಮನೆಯಲ್ಲೇ ವಿಲೇವಾರಿ ಮಾಡುವಂತೆ ಜಿಬಿಎ ಸೂಚಿಸಿದೆ. ಈ ಮಣ್ಣನ್ನು ಹೂಕುಂಡಗಳು ಹಾಗೂ ಕೈತೋಟಗಳಲ್ಲಿ ಮರುಬಳಕೆ ಮಾಡುವಂತೆ ಮನವಿ ಮಾಡಲಾಗಿದೆ.
ಜಿಬಿಎ ನಿಗದಿಪಡಿಸಿರುವ ಸ್ಥಳಗಳನ್ನು ಹೊರತುಪಡಿಸಿ ಬೇರೆಡೆ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ ಗಣೇಶ ಹಬ್ಬದ ಆಚರಣೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಳಕೆ ಕಂಡುಬಂದರೆ ಆಯೋಜಕರಿಗೆ ದಂಡ ವಿಧಿಸಲಾಗುವುದು ಎಂದು ಜಿಬಿಎ ತಿಳಿಸಿದೆ.
ಗಣೇಶೋತ್ಸವದ ವೇಳೆ ಪೆಂಡಾಲ್ ಅಳವಡಿಕೆ ಹಾಗೂ ಧ್ವನಿವರ್ಧಕಗಳ ಬಳಕೆಗೆ ನಿಗದಿತ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ. ಸ್ಥಳೀಯ ಪೊಲೀಸ್ ಠಾಣೆ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಶುಲ್ಕ ಪಾವತಿಸಿದ ರಸೀದಿಯನ್ನು ಅರ್ಜಿಯೊಂದಿಗೆ ಲಗತ್ತಿಸಿದ ಬಳಿಕವೇ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಹಬ್ಬ ಆಚರಿಸಲು ಜಿಬಿಎ ಅನುಮತಿ ನೀಡಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.