



ಬೆಂಗಳೂರು: ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಬಂಧೂಕಿನಿಂದ ಬದಲಾವಣೆ ಸಾಧ್ಯವಿಲ್ಲ ಎನ್ನುವುದನ್ನು ಅರಿತು ನಕ್ಸಲರು ಅರಿತುಕೊಳ್ಳಬೇಕು ಎಂದು ಸರ್ಕಾರವು ಬಯಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ಆಗಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ. ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದರು. ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ಕಳೆದುಕೊಳ್ಳುತ್ತಾರೆ. ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ. ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.