


ಬೆಂಗಳೂರು:** ಮಳೆಗಾಲ ಇನ್ನೂ ಪೂರ್ಣವಾಗಿ ಮುಗಿದಿಲ್ಲ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಬೇಸಿಗೆಯ ಬಿಸಿಲಿನ ಅನುಭವ ಶುರುವಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಂತ್ಯದವರೆಗೂ ಸಾಧಾರಣ ಮಳೆ ಮುಂದುವರಿಯುವುದು ವಾಡಿಕೆ. ಆದರೆ ಈ ಬಾರಿ ಸೆಪ್ಟೆಂಬರ್ ಮೊದಲ ವಾರದಲ್ಲೇ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿರುವುದು ಗಮನ ಸೆಳೆದಿದೆ.
ವಾಡಿಕೆಯಷ್ಟು ಮಳೆಯಾಗದಿರುವುದರಿಂದ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೇಸಿಗೆಯ ವಾತಾವರಣ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇನ್ನು ವಿವಿಧ ಜಿಲ್ಲೆಗಳಲ್ಲೂ ತಾಪಮಾನ ಹೆಚ್ಚಾಗಿದ್ದು, ಬೆಂ. ಗ್ರಾಮಾಂತರದಲ್ಲಿ 30°, ಗದಗದಲ್ಲಿ 30.6°, ಬೀದರ್ನಲ್ಲಿ 33°, ವಿಜಯಪುರದಲ್ಲಿ 32°, ರಾಯಚೂರಿನಲ್ಲಿ 34°, ಬಾಗಲಕೋಟೆಯಲ್ಲಿ 34.6°, ಕಲಬುರಗಿಯಲ್ಲಿ 35.6°, ಕೊಪ್ಪಳದಲ್ಲಿ 36.2°, ಮೈಸೂರಿನಲ್ಲಿ 32°, ಬಳ್ಳಾರಿಯಲ್ಲಿ 35° ಹಾಗೂ ಚಿತ್ರದುರ್ಗದಲ್ಲಿ 31° ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ಸೆ.2ರಿಂದ 7ರವರೆಗೆ ಕರಾವಳಿ ಜಿಲ್ಲೆಗಳ ಶೇ.75ರಷ್ಟು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಶೇ.25ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನ ಕೆಲವೆಡೆ ಹಗುರ ಮಳೆಯಾಗಬಹುದು.
ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರಿನ ವಿಭಾಗದ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹೀಗಾಗಿ, ಮಳೆಗಾಲದ ನಡುವೆಯೇ ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಹವಾಮಾನ ಹೇಗೆ ಬದಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.