



ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ ನ್ಯಾಯಾಲಯದ ತೀರ್ಪಿನ ಮೂಲಕ ಒಂದೊಂದಾಗಿ ಹೊರಬರುತ್ತಿದೆ. ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕೆಲವು ತಿಂಗಳ ಹಿಂದೆಯಷ್ಟೇ ಇಂತಹದ್ದೇ ಪ್ರಕರಣದಲ್ಲಿ ಪಾಲಿಕೆಯ ಅಸಿಸ್ಟೆಂಟ್ ಟೌನ್ ಪ್ಲಾನಿಂಗ್ ಆಫೀಸರ್ ಶಿವರಾಜ್ ಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದೀಗ ಆದಾಯಕ್ಕಿಂತ ಹೆಚ್ಚು ಸಂಪಾದನೆ ಆರೋಪದ ಮೇಲೆ ಮಂಜುನಾಥ ಸ್ವಾಮಿಗೆ ಸಜೆ ನೀಡಲಾಗಿದೆ.
ಆದಾಯಕ್ಕಿಂತ ಹೆಚ್ಚಿನ ಸಂಪಾನೆಯ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಲೋಕಾ ಯುಕ್ತ ಪೊಲೀಸರು 2007ರಲ್ಲಿ ಮಂಜುನಾಥ ಸ್ವಾಮಿ ಅವರ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಕುರಿತು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿದ್ದರು. ಇದೀಗ
ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪುನಲ್ಲಿ
ತಿಳಿಸಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ. ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.