



ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ (MCC) ಲಿಮಿಟೆಡ್ 31 ಮಾರ್ಚ್ 2024 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ ಹಾಗೂ ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.07% ಎನ್.ಪಿ.ಎ. ದಾಖಲಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೋ ಹೇಳಿದರು.
ಅವರು ಶುಕ್ರವಾರದಂದು ಸೆನೆಟ್ ಹಾಲ್ ಮಿಲಾಗ್ರಿಸ್ ನಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಾಖಲೆಯ ಲಾಭ ಮತ್ತು ಕನಿಷ್ಠಎನ್.ಪಿ.ಎ. ಜೊತೆಗೆ, 2023-24 ನೇ ವಿತ್ತೀಯ ವರ್ಷದಲ್ಲಿ ಬ್ಯಾಂಕಿನ ಅಧ್ಯಕ್ಷ, ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತುಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಿದ್ದು, ಪ್ರಸ್ತುತ ವರ್ಷ ಬ್ಯಾಂಕಿನ ಕಾರ್ಯ ವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಅನುಮತಿ ದೊರಕಿದ್ದು, ಇದೊಂದು ಮಹತ್ವದ ಸಾಧನೆಯಾಗಿದೆ ಎಂದರು.
ಈಗಾಗಲೇ ಬ್ರಹ್ಮಾವರದಲ್ಲಿ ಬ್ಯಾಂಕಿನ 17 ನೇ ಶಾಖೆಯನ್ನುತೆರೆದಿದ್ದು, ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಶಾಖೆಗಳನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರರಿಗೆ(ಎನ್ಆರ್ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಆಗಿರುತ್ತದೆ. ಕರ್ನಾಟಕದಲ್ಲಿ ಹಂತ ಹಂತವಾಗಿ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಬ್ಯಾಂಕಿನ ವ್ಯವಹಾರವು ಡಿಸೆಂಬರ್ ಅಂತ್ಯಕ್ಕೆ ರೂ.1000 ಕೋಟಿ ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆಯಾಗಿದೆ ಎಂದು ತಿಳಿಸಿದರು.
ಎಂಸಿಸಿ ಬ್ಯಾಂಕ್ ಆಡಳಿತ ಮಂಡಳಿ:
ಪ್ರಸ್ತುತ ಆರ್ಥಿಕ ವರ್ಷದಲ್ಲಿ 14 ಸದಸ್ಯರು 2023-24 ವರ್ಷಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು, ಕಳೆದ ವರ್ಷ ಅ. 28 ರಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಅನಿಲ್ ಲೋಬೊ ಅವರು ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬ್ಯಾಂಕಿನ ಸದಸ್ಯರು ಬ್ಯಾಂಕಿನ ಮೇಲೆ ಹೊಂದಿರುವ ವಿಶ್ವಾಸವೇ ಇದಕ್ಕೆ ಕಾರಣವಾಗಿದೆ.
ದಕ್ಷಿಣ ಕನ್ನಡ ಮತ್ತುಉಡುಪಿ ಜಿಲ್ಲೆಗಳಲ್ಲಿ 17 ಶಾಖೆಗಳನ್ನು ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್ 2023–24 ವಿತ್ತೀಯ ವರ್ಷದಲ್ಲಿ ದಾಖಲೆಯ ರೂ.13.12 ಕೋಟಿ ವ್ಯಾವಹಾರಿಕ ಲಾಭವನ್ನು ಗಳಿಸಿದೆ. 2023–24 ವಿತ್ತೀಯ ವರ್ಷದಲ್ಲಿಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು,ಬ್ಯಾಂಕಿನ ನಿವ್ವಳ ಮೌಲ್ಯ(Net Worth) ರೂ.62.45 ಕೋಟಿಯಿಂದ ರೂ.76.35 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ.1081 ಕೋಟಿ ದಾಟಿದ್ದು ಕಳೆದ ವರ್ಷಕ್ಕಿಂತ ಶೇಕಡಾ 16 ಏರಿಕೆಯಾಗಿದೆ.
ಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತುಅಧಿಕಾರಿ ವರ್ಗ ಹಾಗೂ ಸಿಬ್ಬಂದಿಯ ಶ್ರಮದಿಂದಇದು ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ – ಆಂಡ್ರ್ಯೂ ಡಿಸೊಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ.ರೊಡ್ರಿಗಸ್, ಡೇವಿಡ್ ಡಿಸೊಜಾ, ಎಲ್ರೊಯ್ ಕಿರಣ್ಕ್ರಾಸ್ಟೊ, ಹೆರಾಲ್ಡ್ ಮೊಂತೆರೊ, ರೋಶನ್ ಡಿಸೊಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೊಜಾ, ಆಲ್ವಿನ್ ಪಿ.ಮೊಂತೆರೊ, ಫೆಲಿಕ್ಸ್ ಡಿ ಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂದಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.