


ನವದೆಹಲಿ:ವಾರದಲ್ಲಿ ಐದು ದಿನಗಳ ಕೆಲಸದ ನಿಯಮ ಜಾರಿಗೊಳಿಸುವುದು ಸೇರಿದಂತೆ ವೇತನ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್ಬಿಯು) ಶುಕ್ರವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಮುಷ್ಕರದ ಹಿನ್ನೆಲೆಯಲ್ಲಿ ದೇಶದಾದ್ಯಂತ, ವಿಶೇಷವಾಗಿ ಸಾರ್ವಜನಿಕ ವಲಯದ ಬ್ಯಾಂಕ್ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ನೌಕರರು ಹಾಗೂ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಹಲವು ಬ್ಯಾಂಕ್ ಶಾಖೆಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ ಎಂದು ಮೂಲಗಳು ತಿಳಿಸಿವೆ.
ಸಾರ್ವಜನಿಕ ವಲಯದ ಬ್ಯಾಂಕ್ಗಳು ಹಾಗೂ ಕೆಲವು ಹಳೆಯ ತಲೆಮಾರಿನ ಖಾಸಗಿ ಬ್ಯಾಂಕ್ಗಳಲ್ಲಿ ನಗದು ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್ ಮತ್ತು ಆಡಳಿತಾತ್ಮಕ ಕೆಲಸಗಳು ಸೇರಿದಂತೆ ಹಲವು ಸೇವೆಗಳಿಗೆ ಅಡಚಣೆ ಉಂಟಾಗಿದೆ.
ಆದರೆ, ಯುಪಿಐ, ಇಂಟರ್ನೆಟ್ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಲಭ್ಯವಿವೆ.
‘ಕೇಂದ್ರ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂಬ ಅಸಮಾಧಾನವಿದೆ’ ಎಂದು ಯುಎಫ್ಬಿಯು ಭಾಗವಾಗಿರುವ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದ್ದಾರೆ.
ಈ ನಡುವೆ, ಎಸ್ಬಿಐ ಸೇರಿದಂತೆ ಸಾರ್ವಜನಿಕ ವಲಯದ ಬ್ಯಾಂಕ್ಗಳು ಮುಷ್ಕರದಿಂದ ಬ್ಯಾಂಕ್ಗಳ ಕಾರ್ಯಾಚರಣೆಯ ಮೇಲೆ ಉಂಟಾಗಬಹುದಾದ ಪರಿಣಾಮದ ಬಗ್ಗೆ ಗ್ರಾಹಕರಿಗೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದವು.
ಎಲ್ಲಾ ಶನಿವಾರಗಳಿಗೂ ರಜೆ ನೀಡುವಂತೆ ಆಗ್ರಹ
ಬ್ಯಾಂಕ್ ನೌಕರರ ಸಂಘಟನೆಗಳು ಎಲ್ಲಾ ಶನಿವಾರಗಳನ್ನು ರಜಾದಿನಗಳೆಂದು ಘೋಷಿಸುವಂತೆ ಒತ್ತಾಯಿಸುತ್ತಿವೆ. 2024ರ ಮಾರ್ಚ್ನಲ್ಲಿ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ) ಜತೆ ನಡೆದ 12ನೇ ದ್ವಿಪಕ್ಷೀಯ ಒಪ್ಪಂದದ ವೇಳೆ ಈ ಬೇಡಿಕೆಗೆ ಒಪ್ಪಿಗೆ ನೀಡಲಾಗಿತ್ತು. ಆದರೆ, ಈ ಕುರಿತು ಕೇಂದ್ರ ಸರ್ಕಾರದಿಂದ ಇನ್ನೂ ಅಧಿಸೂಚನೆ ಹೊರಬಿದ್ದಿಲ್ಲ ಎಂದು ಸಂಘಟನೆಗಳು ಆರೋಪಿಸಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.