



ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಬೆಳಿಗ್ಗೆ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆಗಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಬೆಳದಿಂಗಳ ಸಾಹಿತ್ಯ ಸಮ್ಮೇಳನ, ಕವಿಗೋಷ್ಟಿಯಂಥ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಗಮನ ಸೆಳೆದಿದ್ದ ಶೇಖರ ಅಜೆಕಾರು ಮುಂಬಯಿಯಲ್ಲಿ ಪತ್ರಿಕೋದ್ಯಮ ಪ್ರಾರಂಭಿಸಿದವರು. ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಉಪಸಂಪಾದಕರಾಗಿದ್ದ ಅವರು ಬಳಿಕ ಮಂಗಳೂರಿನ ಜನವಾಹಿನಿಗೆ ಸೇರಿದ್ದರು. ಅನಂತರ ಕನ್ನಡ ಪ್ರಭ ಸಹಿತ ಕೆಲವು ಪತ್ರಿಕೆಗಳಿಗೆ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಇತ್ತೇಚೆಗಿನ ಕೆಲವು ವರ್ಷಗಳಿಂದ ಪತ್ರಿಕೋದ್ಯಮ ಬಿಟ್ಟು ಪೂರ್ಣವಾಗಿ ಸಾಹಿತ್ಯ ಮತ್ತು ಸಂಘಟನೆಯ ಕೆಲಸಗಳಲ್ಲಿ ತೊಡಗಿದ್ದರು.
ಹಲವಾರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದ ಶೇಖರ್ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇಖರ್ ಅಜೆಕಾರು ಅವರ ನಿವಾಸ ಕುರ್ಪಾಡಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.