



ಹೆಬ್ರಿ: ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯ. ಬೇರೆ ಬೇರೆ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿರುವ ದೇಶ ನಮ್ಮದು ಅಂತಹ ಕ್ರೀಡಾ ಸಾಧಕರನ್ನು ಮಾದರಿಯಾಗಿಸಿಕೊಳ್ಳಬೇಕು. ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವಗಳನ್ನು ಬೆಳೆಸಿಕೊಳ್ಳಬೇಕು. ಎಂದು ಹೆಬ್ರಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕಅಧಿಕಾರಿಯಾಗಿರುವ ಶಶಿಧರ್.ಕೆ.ಜಿ ಹೇಳಿದರು.
ಇವರು ಹೆಬ್ರಿಯ ಎಸ್.ಆರ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆದ, ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಉಪಸ್ಥಿತರಿದ್ದ ಹೆಬ್ರಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಾರಾನಾಥ್.ಎಸ್.ಬಂಗೇರ ಮಾತನಾಡಿ, ಹೆಬ್ರಿಯಂತಹ ಗ್ರಾಮೀಣ ಭಾಗದಲ್ಲಿ ಇಂತಹ ಸುಸಜ್ಜಿತವಾದ ಬಾಸ್ಕೆಟ್ಬಾಲ್ ಕ್ರೀಡಾಂಗಣವನ್ನು ಎಸ್.ಆರ್. ಶಿಕ್ಷಣ ಸಂಸ್ಥೆ ಹೊಂದಿರುವುದು ಸಂತಸದ ವಿಚಾರ. ಶಿಕ್ಷಣ ಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಿದಾಗ ಹೆಬ್ರಿಯು ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಅವರು ಮಾತನಾಡಿ ನಮ್ಮ ಸಂಸ್ಥೆಯಲ್ಲಿ ಬಾಸ್ಕೆಟ್ ಬಾಲ್ ಪಂದ್ಯಾಟ ಆಯೋಜಿಸಿದ್ದು ಬಹಳ ಸಂತೋಷ ಉಂಟಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬ್ಯಾಸ್ಕೆಟ್ಬಾಲ್ ಕ್ರೀಡೆಯು ಲಭ್ಯವಾಗುವಂತೆ ಆಗಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಭಾಗವಹಿಸಿದರೆ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಸಾಧ್ಯ. ಕ್ರೀಡೆಯನ್ನು ಧನಾತ್ಮಕವಾಗಿ ಸ್ವೀಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ.ಎನ್ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್, ಹೆಬ್ರಿ ತಾಲೂಕಿನ ಕ್ರೀಡಾ ಸಂಯೋಜಕರಾದ ವಿಜಯ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ನಿಶಿತಾ ನಿರೂಪಿಸಿ, ಉಪನ್ಯಾಸಕಿ ಪವಿತ್ರಾ ಸ್ವಾಗತಿಸಿ, ದೈಹಿಕ ನಿರ್ದೇಶಕರಾದ ಮಧುಶೇಖರ್ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.