


ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಎರಡನೇ ಅವಧಿ ಇಂದಿನಿಂದ ಆರಂಭಗೊಳ್ಳಲಿದೆ. ಇಂದು ಸಂಜೆ 4.05ಕ್ಕೆ ಸರಿಯಾಗಿ ಲೋಕಭವನದಲ್ಲಿ ನೂತನ ಸಚಿವರು (New 20 Minister's Final List) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಇಂದಿನಿಂದ ಆಡಳಿತ ನಡೆಸಲಿದ್ದು, ಡಿಕೆಶಿ ಸಿಎಂ ಆದಾಗಿನಿಂದ ಸಚಿವ ಸ್ಥಾನಕ್ಕಾಗಿ ಹಳ್ಳಿಯಿಂದ ದಿಲ್ಲಿತನಕ ಪದೇ ಪದೇ ಹೋರಾಟ ಮಾಡ್ತಿದ್ದವರ ಜೊತೆಗೆ ಲಾಭಿ ಮಾಡದಿದ್ದವರಿಗೂ ಮಂತ್ರಿಗಿರಿ ದೊರಕಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಹೈಕಮಾಂಡ್ ಕೊನೆಗೂ ಅಳೆದು ತೂಗಿ 20 ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡಿದೆ. ಈಗಾಗಲೇ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿರುವ 20 ಸಚಿವರ ಪಟ್ಟಿಯೂ ಫೈನಲ್ ಆಗಿದೆ. ಈ ಸಿಕ್ಕಿರುವ ಅಂತಿಮ ಪಟ್ಟಿಯ ಪ್ರಕಾರ, ವಿಧಾನಸಭೆಯ ನೂತನ ಸ್ಪೀಕರ್ ಆಗಿ ಹಿರಿಯ ಶಾಸಕ ಜೆಎಸ್ ಪಾಟೀಲ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಡೆಪ್ಯೂಟಿ ಸ್ಪೀಕರ್ ಆಗಿ ಶಾಸಕ ಎಎಸ್ ಪೊನ್ನಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ವಿಧಾನ ಪರಿಷತ್ನ ಸ್ಪೀಕರ್ ಆಗಿ ಸಲೀಂ ಅಹ್ಮದ್ ಅವರನ್ನು ಆಯ್ಕೆ ಮಾಡಲಾಗಿದ್ದು, ಉಪ ಸಭಾಪತಿಯನ್ನಾಗಿ ಉಮಾಶ್ರೀ ಅವರನ್ನು ಅಂತಿಮಗೊಳಿಸಲಾಗಿದೆ.
ಸಚಿವರಾಗುತ್ತಿರುವ 20 ಮಂದಿ ಯಾರ್ಯಾರು?
ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಇಂದು ಸಂಜೆ ರಾಜ್ಯದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಾಲಿ ಶಾಸಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಪೈಕಿ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಪಿಎಂ ನರೇಂದ್ರ ಸ್ವಾಮಿ ಸಚಿವ ಸ್ಥಾನದ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇನ್ನು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಜ್ ತಂಗಡಗಿ ಕೂಡ ಈ ಬಾರಿಯೂ ಸಚಿವ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ. ಇನ್ನು, ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ರುದ್ರಪ್ಪ ಲಮಾಣಿ, ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆಎಸ್ ಬಸವಂತಪ್ಪ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ ನಾಗೇಂದ್ರ, ಚಳ್ಳಕೆರೆ ಶಾಸಕ ಟಿ ರಘುಮೂರ್ತಿ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಕಲಘಟಗಿ ಶಾಸಕ ಸಂತೋಷ್ ಲಾಡ್, ಸೊರಬ ಶಾಸಕ ಮಧು ಬಂಗಾರಪ್ಪ ಇಂದು ಸಚಿವರಾಗುತ್ತಿದ್ದಾರೆ.
ಇನ್ನುಳಿದಂತೆ, ಚಾಮರಾಜನಗರ ಶಾಸಕ ಪುತ್ತುರಂಗಶೆಟ್ಟಿ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್, ನಾಗಮಂಗಲ ಶಾಸಕ ಎನ್. ಚಲುವರಾಯ ಸ್ವಾಮಿ, ಅರಸೀಕೆರೆ ಶಾಸಕ ಕೆ. ಎಂ. ಶಿವಲಿಂಗೇಗೌಡ, ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ, ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎಂಎಲ್ಸಿ ಗಾಯತ್ರಿ ಶಾಂತೇಗೌಡ, ಯೆಲ್ಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ, ಹುನಗುಂದ ಶಾಸಕ ವಿಜಯಾನಂದ್ ಕಾಶಪ್ಪನವರ್ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ದೊರಕಿದೆ. ಇಂದು ಸಂಜೆ ಇವರೆಲ್ಲರೂ ಲೋಕಭವನದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಲೋಕಭವನದಲ್ಲಿ ನೂತನ ಮಂತ್ರಿಗಳ ಪ್ರಮಾಣವಚನ ಹಿನ್ನೆಲೆಯಲ್ಲಿ ಲೋಕಭವನದ ಸುತ್ತಮುತ್ತ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪಶ್ಚಿಮ ವಲಯ ಜಂಟಿ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಬಂದೋಬಸ್ತ್ ಗಾಗಿ 665ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.