



ಪರ್ಯಾಯಮಹೋತ್ಸವದ ಅಂಗವಾಗಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಶ್ರೀಗಳು ಸೋಮವಾರ ನಗರದ ಜೋಡುಕಟ್ಟೆಯ ಮೂಲಕ ಪುರಪ್ರವೇಶ ಮಾಡಿದರು.ಸಾಂಪ್ರದಾಯಿಕ ಚಂಡೆ, ವಾದ್ಯ, ಬ್ಯಾಂಡ್, ಭಜನ ಸಂಕೀರ್ತನಾ ತಂಡಗಳು ಮೆರವಣಿಯಲ್ಲಿದ್ದವು.
ಮಧ್ಯಾಹ್ನ 3:00 ಗಂಟೆಗೆ ಜೋಡುಕಟ್ಟೆ ಪ್ರವೇಶಿಸಿದ ವಿದ್ಯಾಸಾಗರ ತೀರ್ಥ ಶ್ರೀಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ .ಎಂ ಹೂಮಾಲೆ ಹಾಕಿ ಸ್ವಾಗತಿಸಿದರು
ಇದೇ ಸಂದರ್ಭದಲ್ಲಿ ಪಟ್ಟದ ದೇವರಾದ ದ್ವಿಭುಜ ಕಾಳೀಯ ಮರ್ಧನ, ಕೃಷ್ಣ, ನರಸಿಂಹ ದೇವರನ್ನು ಚಿನ್ನದ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಯತಿಗಳನ್ನು ಗೌರವಾದರಪೂರ್ವಕವಾಗಿ ಸ್ವಾಗತಿಸಲಾಯಿತು. ಕೋವಿಡ್ ಕಾರಣದಿಂದಾಗಿ ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಸೀಮಿತ ಭಕ್ತಾದಿಗಳ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಯಿತು.ದಂಡತೀರ್ಥ ಮಠದಿಂದ ನಗರದ ಜೋಡುಕಟ್ಟೆಗೆ ಆಗಮಿಸಿದ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿಯವರನ್ನು ತೆರೆದ ವಾಹನದಲ್ಲಿ ಕುಳ್ಳಿರಿಸಿ, ಮಠದ ಉಪಾಸ್ಯಮೂರ್ತಿ ಕಾಳೀಯಮರ್ದನ ಶ್ರೀನೃಸಿಂಹಸ್ವಾಮಿಯನ್ನು ಸ್ವರ್ಣ ಪಲ್ಲಕಿಯಲ್ಲಿರಿಸಿ ಮೆರವಣಿಗೆ ಮೂಲಕ ಕೃಷ್ಣಮಠಕ್ಕೆ ಬರಮಾಡಿಕೊಳ್ಳಲಾಯಿತು. ರಥಬೀದಿಗೆ ಆಗಮಿಸಿದ ಕೃಷ್ಣಾಪುರ ಶ್ರೀಗಳು ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನನ್ನು ಕಂಡು ಚಂದ್ರೇಶ್ವರ ಮತ್ತು ಅನಂತೇಶ್ವರ ದೇವರನ್ನು ನಮಿಸಿ, ಮಧ್ವಾಚಾರ್ಯರಿಗೆ ಪೂಜೆ ಸಲ್ಲಿಸಿ, ಶ್ರೀಕೃಷ್ಣ ಮಠಕ್ಕೆ ಆಗಮಿಸಿದರು.
ಜನವರಿ.18 ರಂದು ಪರ್ಯಾಯ ಮಹೋತ್ಸವ ನಡೆಯಲಿದೆ. ಅಂದು ಬೆಳಗಿನ ಜಾವ 5:55ಕ್ಕೆ ವಿದ್ಯಾಸಾಗರ ತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ. ಈ ಮೂಲಕ ಮುಂದಿನ 2 ವರ್ಷಗಳ ಕಾಲ ಕೃಷ್ಣನ ಪೂಜಾಧಿಕಾರಿವನ್ನು ಪಡೆದುಕೊಳ್ಳಲಿದ್ದಾರೆ.
ಭಾವೀ ಪರ್ಯಾಯ ಶ್ರೀಗಳಿಗೆ ಪೌರ ಸನ್ಮಾನ: ಸಂಜೆ ರಥಬೀದಿಯಲ್ಲಿ ಪರ್ಯಾಯ ಮಹೋತ್ಸವ ಸಮಿತಿ ಮತ್ತು ಉಡುಪಿ ನಗರಸಭೆ ವತಿಯಿಂದ ಭಾವೀ ಪರ್ಯಾಯ ಶ್ರೀವಿದ್ಯಾಸಾಗರತೀರ್ಥರಿಗೆ ಪೌರ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಪರ್ಯಾಯ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಾಸಕ ರಘುಪತಿ ಭಟ್, ಗೌರವಾಧ್ಯಕ್ಷ ಕುಂಭಾಶಿ ಸೂರ್ಯನಾರಾಯಣ ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ ಪಾಡಿಗಾರು, ನಗರಸಭೆ ಸದಸ್ಯರು ಮೊದಲಾದವರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.