



ವಿಟ್ಲ: ಹಿರಿಯ ಯಕ್ಷಗಾನ ಕಲಾವಿದ 'ಯಕ್ಷರಂಗದ ರಾಜ' ಎಂದೇ ಖ್ಯಾತರಾದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಯಕ್ಷಗಾನ ಕ್ಷೇತ್ರದಲ್ಲಿ ಮುಂಚೂಣಿಯ ಕಲಾವಿದರಾಗಿ ಐವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ನಾರಾಯಣ ಶೆಟ್ಟಿ ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪು ಮೂಡಿಸಿದ್ದರು. ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ಇವರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.
ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಯ ಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.
ಕಟೀಲು ಮೇಳದಲ್ಲಿ ಅವರು ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು.
2016ನೇ ಸಾಲಿನ ಚೊಚ್ಚಲ 'ಯಕ್ಷಧ್ರುವ ಪಟ್ಲ ಪ್ರಶಸ್ತಿ' ಸೇರಿದಂತೆ ಹಲವು ಸನ್ಮಾನಗಳು ಇವರ ಮುಡಿಗೇರಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.